ಶಿಕಾರಿಪುರ ಲೈವ್:
ಬಸವಾಧಿಶರಣರ ವಚನಗಳ ಸಂದೇಶ ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಬನಸಿರಿ ಲಯನ್ಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸಂದೀಪ್ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ದಿವಂಗತ ತ್ಯಾಗರ್ತಿ ಗೌರಮ್ಮ ಸಿದ್ದಪ್ಪ ದತ್ತಿ ಹಾಗೂ ದಿವಂಗತ ವಕೀಲರಾದ ಅಶೋಕ್ ಪಾಟೀಲ್ ಸ್ಮರಣಾರ್ಥ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿವಶರಣರ ಸಾಹಿತ್ಯ ವಿಷಯ ಕುರಿತು ಅವರು ಮಾತನಾಡಿದರು.
ಬಸವಾಧಿಶರಣರು ನುಡಿದಂತೆ ನಡೆದಿದ್ದರು. ನುಡಿದಂತೆ ನಡೆದ ಕಾರಣ12ನೇ ಶತಮಾನದಲ್ಲಿ ಶರಣರು ನೀಡಿದ ವಚನ ಸಾಹಿತ್ಯದ ಸಂದೇಶಗಳ ವಿಚಾರಧಾರೆಗಳನ್ನು 21ನೇ ಶತಮಾನದಲ್ಲೂ ನಾವು ಅನುಸರಿಸುತ್ತಿದ್ದೇವೆ. ವಚನ ಸಾಹಿತ್ಯ ವ್ಯಕ್ತಿಯ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದರು.
ಕನ್ನಡ ಸಾಹಿತ್ಯಕ್ಕೆ ಕನಕದಾಸರ ಕೊಡುಗೆ ವಿಷಯ ಕುರಿತು ಮಾತನಾಡಿದ ಜುಬೇದ ಕಾಲೇಜಿನ ಉಪನ್ಯಾಸಕ ಕರಿಬಸಪ್ಪ, ರಾಮಧಾನ್ಯ ಚರಿತ್ರೆ, ಹರಿಕಥೆ ಸಾರ, ನಳಚರಿತ್ರೆ ಸೇರಿದಂತೆ ಹಲವು ಕೃತಿಗಳನ್ನು ಕನಕದಾಸರು ರಚಿಸಿದ್ದಾರೆ. ತಮ್ಮ ಕೀರ್ತನೆಗಳ ಮೂಲಕ ಸಮಾಜದ ಜನರ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಿ. ರಮೇಶ್ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್. ರಘು ಮಾತನಾಡಿದರು.
ಇದೇ ಸಂದರ್ಭದಲ್ಲಿ ಕವಿ ಕುಸ್ಕೂರು ಪ್ರಶಾಂತ್ ಕವನ ವಾಚಿಸಿದರು.
ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಸುಭಾಷ್ ಚಂದ್ರ ಸ್ಥಾನಿಕ್,
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಘಟನಾ ಕಾರ್ಯದರ್ಶಿ ಕೆ.ಎಸ್.ಹುಚ್ರಾಯಪ್ಪ, ಜಾನಪದ ಪರಿಷತ್ ಅಧ್ಯಕ್ಷ ಬಿ. ಪಾಪಯ್ಯ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ಜಡಿಯಪ್ಪ ಪಸಾರದ, ದತ್ತಿ ಕಾರ್ಯಕ್ರಮ ಸಂಚಾಲಕ ಬಿ. ಬಂಗಾರಪ್ಪ, ಕನ್ನಡ ಸಾಹಿತ್ಯ ಪರಿಷತ್ ಸದಸ್ಯ ದೂದಿಹಳ್ಳಿ ಪ್ರವೀಣ್ ಉಪಸ್ಥಿತರಿದ್ದರು.
Leave a comment