ಶಿಕಾರಿಪುರ ಲೈವ್:
ಕಾಂಗ್ರೆಸ್ ಸರ್ಕಾರ ಜನತೆಗೆ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದ್ದು,ಭ್ರಷ್ಟಾಚಾರದಲ್ಲಿ ಮಾತ್ರ ತೊಡಗಿದೆ ಎಂದು ಆರೋಪಿಸಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,
ರಾಜ್ಯದ ಜನರಿಗೆ ಉತ್ತಮ ಆಡಳಿತ ನೀಡದೇ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ,ಭ್ರಷ್ಟಾಚಾರ ಹೆಚ್ಚಾಗಿದೆ.
ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಮತ್ತು ಮುಖಂಡರುಗಳು ರಾಜ್ಯ ಸರ್ಕಾರದ ಮತ್ತು ಸಚಿವರುಗಳ ವಿರುದ್ಧ ಬಹಿರಂಗವಾಗಿ ಸಾಕ್ಷಿ ಸಮೇತ ದಾಖಲೆಗಳೊಂದಿಗೆ ಮಾಧ್ಯಮಗಳಲ್ಲಿ ಆರೋಪಿಸಿದ್ದಾರೆ. ವಸತಿ ಇಲಾಖೆಯು ರಾಜ್ಯದಲ್ಲಿ ಅತ್ಯಂತ ಹಿಂದುಳಿದ,ಬಡತನದ ಕುಟುಂಬಗಳ ನಿವೇಶನ ಹಾಗೂ ವಸತಿ ರಹಿತ ನೈಜ ಪಲಾನುಭವಿಗಳಿಗೆ ಮೀಸಲಾಗಿರುವ ವಸತಿ ಯೋಜನೆಗಳನ್ನು ಲಂಚ ನೀಡುವವರಿಗೆ ಮಾತ್ರ ನೀಡುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ.
ರಾಜ್ಯ ಸರ್ಕಾರ ಇದುವರೆಗೂ ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳಾದ ರಸ್ತೆ ಸೇತುವೆ,ಕೆರೆ ಕಟ್ಟೆಗಳ ನಿರ್ಮಾಣ, ಒಳಚರಂಡಿ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮುಂತಾದವುಗಳನ್ನು ಒದಗಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುತ್ತದೆ. ಗುತ್ತಿಗೆದಾರರ ಬಾಕಿ ಹಣ ಪಾವತಿ ಮಾಡುವಲ್ಲಿಯೂ ಸಹ ವಿಳಂಬ ಮಾಡುತ್ತಾ ಬಂದಿದ್ದು ಬಡವರ ಹಾಗೂ ರೈತ ವಿರೋಧಿ ಸರ್ಕಾರವಾಗಿ ಮಾರ್ಪಟ್ಟಿರುತ್ತದೆ, ಪರಿಶಿಷ್ಯರಿಗೆ ಮೀಸಲಾಗಿರುವ ಹಣದಲ್ಲಿಯೂ ಅತ್ಯಂತ ತಾರತಮ್ಯವೆಸಗುತ್ತಿದ್ದು ಆ ವರ್ಗದ ಜನರಿಗೆ ಅನ್ಯಾಯ ಮಾಡುತ್ತಿದ್ದು,ಕೇಲವೇ ಜಾತಿಗಳ ತುಷ್ಠಿಕರಣ ರಾಜಕಾರಣ ಮಾಡುತ್ತಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಸತಿ ಸಚಿವ ಜಮೀರ್ ಆಹಮದ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ತಾಲ್ಲೂಕು ಉಸ್ತುವಾರಿ ಎಚ್.ಎಂ. ಸಂಗಯ್ಯ, ತಾಲೂಕು ಅಧ್ಯಕ್ಷ ಬೆಂಕಿ ಯೋಗೀಶ್, ರಾಜ್ಯ ಕಾರ್ಯದರ್ಶಿ ಹೀರಾನಾಯ್ಕ, ಜಿಲ್ಲಾ ಉಪಾಧ್ಯಕ್ಷ ಬೂದಿಗೌಡ್ರು, ಪ್ರಧಾನ ಕಾರ್ಯದರ್ಶಿ ಕೆ. ಮಂಜುನಾಥ್, ಯುವ ಘಟಕ ಅಧ್ಯಕ್ಷ ಕಾರ್ತೀಕ್, ನಗರ ಘಟಕ ಅಧ್ಯಕ್ಷ ಹೇಮಂತ್, ಮಹಿಳಾ ಘಟಕ ಜಿಲ್ಲಾಧ್ಯಕ್ಷ ಗೀತಾ ಸತೀಶ್, ಉಪಾಧ್ಯಕ್ಷೆ ಸರೋಜಮ್ಮ, ಮುಖಂಡರಾದ ಆರ್. ಜಯಣ್ಣ, ನಸ್ರೀನ್ ಬಾನು ಮತ್ತಿತರರು ಉಪಸ್ಥಿತರಿದ್ದರು.
Leave a comment